1
|
ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ. |
2
|
ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು. |
3
|
ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು |
4
|
ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬಂದನು. |
5
|
ಬಳಿಕ ಕ್ರಿಸ್ತನು ಪೇತ್ರನಿಗೆ ಕಾಣಿಸಿಕೊಂಡನು. ಅನಂತರ ಹನ್ನೆರಡು ಮಂದಿ ಅಪೊಸ್ತಲರಿಗೆ ಕಾಣಿಸಿಕೊಂಡನು. |
6
|
ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು. |
7
|
ಬಳಿಕ ಕ್ರಿಸ್ತನು ಯಾಕೋಬನಿಗೆ ಕಾಣಿಸಿಕೊಂಡನು. ಅನಂತರ ಮತ್ತೊಮ್ಮೆ ಎಲ್ಲಾ ಅಪೊಸ್ತಲರಿಗೆ ಕಾಣಿಸಿಕೊಂಡನು. |
8
|
ಕಟ್ಟಕಡೆಗೆ, ಕ್ರಿಸ್ತನು, ದಿನ ತುಂಬುವ ಮೊದಲೇ ಹುಟ್ಟಿದಂತಿದ್ದ ನನಗೆ ಕಾಣಿಸಿಕೊಂಡನು. |
9
|
ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ. |
10
|
ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.) |
11
|
ಆದ್ದರಿಂದ ನಾನು ಬೋಧನೆ ಮಾಡಿದೆನೊ ಅಥವಾ ಇತರ ಅಪೊಸ್ತಲರು ಬೋಧನೆ ಮಾಡಿದರೊ ಎಂಬುದು ಮುಖ್ಯವಲ್ಲ. ನಾವೆಲ್ಲರೂ ಒಂದೇ ಸಂದೇಶವನ್ನು ಬೋಧಿಸುತ್ತೇವೆ ಮತ್ತು ನೀವು ನಂಬಿರುವುದೂ ಅದನ್ನೇ. |
12
|
ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ? |
13
|
ಜನರಿಗೆ ಪುನರುತ್ಥಾನವಿಲ್ಲದಿದ್ದರೆ ಕ್ರಿಸ್ತನು ಸಹ ಸತ್ತವರೊಳಗಿಂದ ಎದ್ದೇಬಂದಿಲ್ಲ. |
14
|
ಕ್ರಿಸ್ತನು ಎದ್ದೇಬಂದಿಲ್ಲವಾದರೆ ನಮ್ಮ ಬೋಧನೆಗೂ ನಿಮ್ಮ ನಂಬಿಕೆಗೂ ಯಾವ ಬೆಲೆಯೂ ಇಲ್ಲ. |
15
|
ಅಲ್ಲದೆ, ದೇವರ ಬಗ್ಗೆ ನಾವು ಸುಳ್ಳುಸಾಕ್ಷಿ ಹೇಳಿದಂತಾಗುವುದು. ಏಕೆಂದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಿದನೆಂದು ನಾವು ದೇವರ ಬಗ್ಗೆ ಬೋಧಿಸಿದೆವು. ಜನರು ಜೀವಂತವಾಗಿ ಎದ್ದುಬರದಿದ್ದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಲೇ ಇಲ್ಲ. |
16
|
ಸತ್ತುಹೋದ ಜನರು ಎಬ್ಬಿಸಲ್ಪಡದಿದ್ದರೆ, ಕ್ರಿಸ್ತನು ಸಹ ಎಬ್ಬಿಸಲ್ಪಡಲೇ ಇಲ್ಲ. |
17
|
ಕ್ರಿಸ್ತನು ಜೀವಂತವಾಗಿ ಎಬ್ಬಿಸಲ್ಪಟ್ಟಿಲ್ಲದಿದ್ದರೆ, ನಿಮ್ಮ ನಂಬಿಕೆಯು ನಿಷ್ಪ್ರಯೋಜಕವಾಗಿದೆ ಮತ್ತು ನೀವು ನಿಮ್ಮ ಪಾಪಗಳಿಂದ ಇನ್ನೂ ಅಪರಾಧಿಗಳಾಗಿದ್ದೀರಿ. |
18
|
ಇದಲ್ಲದೆ ಕ್ರಿಸ್ತನಲ್ಲಿದ್ದು ಸತ್ತುಹೋದವರು ನಾಶವಾಗಿದ್ದಾರೆ. |
19
|
ನಮಗೆ ಕ್ರಿಸ್ತನಲ್ಲಿರುವ ನಿರೀಕ್ಷೆಯು ಈ ಲೋಕಕ್ಕೆ ಮಾತ್ರ ಸೀಮಿತವಾಗಿದ್ದರೆ, ನಾವು ಬೇರೆಲ್ಲ ಜನರಿಗಿಂತಲೂ ದುಃಖಕ್ಕೆ ಪಾತ್ರರಾಗಿದ್ದೇವೆ. |
20
|
ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು. |
21
|
ಒಬ್ಬ ಮನುಷ್ಯನು (ಆದಾಮನು) ಮಾಡಿದ ಕಾರ್ಯದಿಂದಾಗಿ ಜನರು ಮರಣ ಹೊಂದುವಂತೆಯೇ ಒಬ್ಬ ಮನುಷ್ಯನ (ಕ್ರಿಸ್ತನ) ಮೂಲಕವಾಗಿಯೇ ಜನರು ಜೀವಂತವಾಗಿ ಎದ್ದುಬರುವರು. |
22
|
ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ. |
23
|
ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದು ಬರುವರು. |
24
|
ಅನಂತರ ಅಂತ್ಯ ಬರುವುದು. ಕ್ರಿಸ್ತನು ಎಲ್ಲಾ ಅಧಿಪತಿಗಳನ್ನು, ಅಧಿಕಾರಗಳನ್ನು ಮತ್ತು ಶಕ್ತಿಗಳನ್ನು ನಾಶಮಾಡುವನು. ಬಳಿಕ ಕ್ರಿಸ್ತನು ತಂದೆಯಾದ ದೇವರಿಗೆ ರಾಜ್ಯವನ್ನು ಕೊಡುವನು. |
25
|
ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು. |
26
|
ನಾಶವಾಗುವ ಕಡೆಯ ಶತ್ರುವೆಂದರೆ ಮರಣವೇ. |
27
|
"ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ. |
28
|
ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು. |
29
|
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ? |
30
|
ನಮ್ಮ ವಿಷಯವೇನು? ನಾವು ನಮ್ಮನ್ನು ಪ್ರತಿ ತಾಸಿನಲ್ಲಿಯೂ ಅಪಾಯಕ್ಕೆ ಒಡ್ಡುವುದು ಏಕೆ? |
31
|
ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ. |
32
|
ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, "ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.” |
33
|
ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.” |
34
|
ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ. |
35
|
"ಸತ್ತವರು ಹೇಗೆ ಎದ್ದು ಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?" ಎಂದು ಕೆಲವರು ಕೇಳಬಹುದು. |
36
|
ಅವು ಮೂಢ ಪ್ರಶ್ನೆಗಳು. ನೀವು ಬೀಜವನ್ನು ಬಿತ್ತಿದಾಗ, ಆ ಬೀಜವು ಜೀವ ಹೊಂದಿಕೊಂಡು ಬೆಳೆಯುವುದಕ್ಕಿಂತ ಮುಂಚೆ ಸಾಯಲೇಬೇಕು. |
37
|
ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು. |
38
|
ಅದರೆ ದೇವರು ತನ್ನ ಯೋಜನೆಗನುಸಾರವಾಗಿ ಅದಕ್ಕೆ ದೇಹವನ್ನು ಕೊಡುತ್ತಾನೆ ಮತ್ತು ದೇವರು ಪ್ರತಿಯೊಂದು ಬಗೆಯ ಬೀಜಕ್ಕೆ ಅದರದೇ ಆದ ದೇಹವನ್ನು ಕೊಡುತ್ತಾನೆ. |
39
|
ಎಲ್ಲಾ ಶರೀರಗಳು ಒಂದೇ ರೀತಿಯ ಮಾಂಸವನ್ನು ಹೊಂದಿರುವುದಿಲ್ಲ. ಜನರಿಗೆ ಒಂದು ಬಗೆಯ ಮಾಂಸವಿರುತ್ತದೆ; ಪ್ರಾಣಿಗಳಿಗೆ ಮತ್ತೊಂದು ಬಗೆಯ ಮಾಂಸವಿರುತ್ತದೆ; ಪಕ್ಷಿಗಳಿಗೆ ಇನ್ನೊಂದು ಬಗೆಯ ಮಾಂಸವಿರುತ್ತದೆ. ಮೀನುಗಳು ಬೇರೊಂದು ರೀತಿಯ ಮಾಂಸವನ್ನು ಹೊಂದಿರುತ್ತವೆ. |
40
|
ಇದಲ್ಲದೆ ಪರಲೋಕದ ಶರೀರಗಳಿವೆ ಮತ್ತು ಭೂಲೋಕದ ಶರೀರಗಳಿವೆ. ಪರಲೋಕದ ಶರೀರಗಳಿಗೆ ಒಂದು ಬಗೆಯ ಸೌಂದರ್ಯವಿರುತ್ತದೆ. ಭೂಲೋಕದ ಶರೀರಗಳಿಗೆ ಮತ್ತೊಂದು ಬಗೆಯ ಸೌಂದರ್ಯವಿರುತ್ತದೆ. |
41
|
ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ. |
42
|
ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದು ಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ. |
43
|
ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದು ಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದು ಬಂದಾಗ ಅದಕ್ಕೆ ಶಕ್ತಿಯಿರುತ್ತದೆ. |
44
|
ಬಿತ್ತಲ್ಪಟ್ಟ ದೇಹವು ಭೌತಿಕವಾದದ್ದು. ಆದರೆ ಅದು ಎದ್ದು ಬಂದಾಗ, ಆತ್ಮಿಕ ದೇಹವಾಗಿರುತ್ತದೆ. ಭೌತಿಕ ದೇಹವಿದೆ. ಆದ್ದರಿಂದ ಆತ್ಮಿಕ ದೇಹವೂ ಇದೆ. |
45
|
"ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು. |
46
|
ಮೊದಲು ಬಂದವನು ಆತ್ಮಿಕ ಮನುಷ್ಯನಲ್ಲ, ಅವನು ಪ್ರಾಕೃತ ಮನುಷ್ಯ. ಅನಂತರ ಆತ್ಮಿಕ ಮನುಷ್ಯನು ಬಂದನು. |
47
|
ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು. |
48
|
ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ. |
49
|
ಭೂಮಿಯ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಂಡೆವು. ಆದ್ದರಿಂದ ಪರಲೋಕದ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಳ್ಳುವೆವು. |
50
|
ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. |
51
|
ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು. |
52
|
ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು. |
53
|
ಅಳಿದುಹೋಗುವ ಈ ದೇಹವು ಅಳಿದುಹೋಗದ್ದನ್ನು ಧರಿಸಿಕೊಳ್ಳುವುದು. ಮರಣಾಧೀನವಾದ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು. |
54
|
ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ: "ಮರಣವು ಜಯದಲ್ಲಿ ನುಂಗಿಯೇ ಹೋಯಿತು.” ಯೆಶಾಯ 25:8 |
55
|
"ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ಕೇಡುಮಾಡುವ ನಿನ್ನ ಶಕ್ತಿ ಎಲ್ಲಿ?" ಹೋಶೇಯ 13:14 |
56
|
ಕೇಡುಮಾಡಲು ಮರಣಕ್ಕಿರುವ ಶಕ್ತಿಯು ಪಾಪವೇ. ಪಾಪದ ಶಕ್ತಿಯು ಧರ್ಮಶಾಸ್ತ್ರವೇ. |
57
|
ಆದರೆ ನಾವು ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನು ನಮಗೆ ಜಯವನ್ನು ಕೊಡುತ್ತಾನೆ. |
58
|
ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ. |
1-Corinthians 15:5 Kannada Language Bible Words basic statistical display
COMING SOON ...