“ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲಿಕನಿಗೆ ಹಿಂತಿರುಗಿಸಬೇಕು. ಒಂದು ವೇಳೆ ಆ ಮಾಲಿಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು.
“ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಆ ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು.
“ನೀವು ಮೋಸದ ಕಾರ್ಯದಿಂದ ದೂರವಾಗಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಲೇಬಾರದು. ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸದೆ ಬಿಡುವುದಿಲ್ಲ.
ಆದರೆ ಏಳನೆಯ ವರ್ಷದಲ್ಲಿ ನಿಮ್ಮ ಭೂಮಿಯನ್ನು ಬೀಳುಬಿಡಿರಿ; ಬೀಜಬಿತ್ತಬೇಡಿರಿ. ಏಳನೆಯ ವರ್ಷ ನೀವು ಏನನ್ನೂ ಬೆಳೆಸಬಾರದು. ನಿಮ್ಮ ಭೂಮಿಯಲ್ಲಿ ಏನಾದರೂ ಬೆಳೆದರೆ ಅದನ್ನು ಬಡವರು ತಿನ್ನಲಿ. ಉಳಿದದ್ದನ್ನು ಪ್ರಾಣಿಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ವಿಷಯದಲ್ಲಿಯೂ ಆಲಿವ್ ಮರಗಳ ತೋಪಿನ ವಿಷಯದಲ್ಲಿಯೂ ಇದೇ ನಿಯಮವನ್ನು ಪಾಲಿಸಬೇಕು.
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.
“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.
“ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು.
ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡು ಮಾಡುವವರಿಗೆಲ್ಲಾ ಕೇಡು ಮಾಡುವೆನು.’
“ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.
“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.
“ನೀವು ನಿಮ್ಮ ವೈರಿಗಳ ವಿರುದ್ಧ ಯುದ್ಧ ಮಾಡುವಾಗ, ನಿಮ್ಮ ವೈರಿಗಳನ್ನೆಲ್ಲಾ ಸೋಲಿಸುವಂತೆ ನಾನು ನಿಮಗೆ ನನ್ನ ಮಹಾಶಕ್ತಿಯಿಂದ ಸಹಾಯ ಮಾಡುವೆನು. ನಿಮ್ಮ ವೈರಿಗಳು ಯುದ್ಧದಲ್ಲಿ ಭಯದಿಂದಲೂ ಗಲಿಬಿಲಿಯಿಂದಲೂ ಓಡಿಹೋಗುವರು.
ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು.
“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.
“ನೀವು ಆ ಜನರೊಡನೆಯಾಗಲಿ ಅವರ ದೇವರುಗಳೊಡನೆಯಾಗಲಿ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು. 33ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”