ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.
ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು.
ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು! ಎಂದು ಕೂಗಿದರು. ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.
ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.
ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲೀ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಈ ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.
ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.
ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.
ಆ ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು.
ಸೈನಿಕರು ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಆತನ ಬಟ್ಟೆಗಳನ್ನು ನಾಲ್ಕು ಭಾಗ ಮಾಡಿ ಒಬ್ಬೊಬ್ಬರು ಒಂದೊಂದು ಭಾಗವನ್ನು ತೆಗೆದುಕೊಂಡರು. ಅಲ್ಲದೆ ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಅದು ಹೊಲಿಗೆಯಿಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೊ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು. “ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು; ನನ್ನ ಅಂಗಿಗಾಗಿ ಚೀಟಿ ಹಾಕಿದರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು. ಕೀರ್ತನೆ 22:18
ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್ದಿನವಾಗಿತ್ತು. ಸಬ್ಬತ್ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸ ಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು.
(ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)
ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.
ನಿಕೊದೇಮನೂ ಯೋಸೇಫನೊಂದಿಗೆ ಹೋದನು. ಹಿಂದೊಮ್ಮೆ, ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನೊಂದಿಗೆ ಮಾತಾಡಿದ್ದವನೇ ನಿಕೊದೇಮನು. ಅವನು ಸುಮಾರು ಐವತ್ತು ಕಿಲೋಗ್ರಾಮಿನಷ್ಟು ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಬಂದನು. ಆ ಸುಗಂಧದ್ರವ್ಯವು ರಕ್ತಬೋಳ ಮತ್ತು ಅಗರುಗಳ ಮಿಶ್ರಣವಾಗಿತ್ತು.