1
|
ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು. |
2
|
ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು. |
3
|
ಯೇಸು ಕೈಬತ್ತಿದ್ದ ಆ ಮನುಷ್ಯನಿಗೆ, “ಎದ್ದುನಿಲ್ಲು, ಜನರೆಲ್ಲರೂ ನಿನ್ನನ್ನು ನೋಡಲಿ” ಎಂದು ಹೇಳಿದನು. |
4
|
ನಂತರ ಯೇಸು ಜನರಿಗೆ, “ಸಬ್ಬತ್ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟ ಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು. |
5
|
ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು. |
6
|
ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು. |
7
|
ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟು ಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು. |
8
|
ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು. |
9
|
ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು. |
10
|
ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು. |
11
|
ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು. |
12
|
ಆದರೆ ಯೇಸು ತಾನು ಯಾರೆಂಬುದನ್ನು ಜನರಿಗೆ ತಿಳಿಸಬಾರದೆಂದು ಅವುಗಳಿಗೆ ಖಂಡಿತವಾಗಿ ಆಜ್ಞಾಪಿಸಿದನು. |
13
|
ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು. |
14
|
ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಈ ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು |
15
|
ಅಲ್ಲದೆ ದೆವ್ವಗಳಿಂದ ಪೀಡಿತರಾಗಿರುವ ಜನರನ್ನು ಅವುಗಳಿಂದ ಬಿಡಿಸುವುದಕ್ಕೆ ಅವರಿಗೆ ಅಧಿಕಾರ ಕೊಡಬೇಕೆಂಬುದು ಆತನ ಅಪೇಕ್ಷೆಯಾಗಿತ್ತು. |
16
|
ಯೇಸುವು ಈ ಹನ್ನೆರಡು ಮಂದಿಯನ್ನು ಆರಿಸಿಕೊಂಡನು: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರನ್ನಿತ್ತನು), |
17
|
ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ ‘ಸಿಡಿಲಿನ ಜನರು’ ಎಂದರ್ಥ.) |
18
|
ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ |
19
|
ಮತ್ತು ಇಸ್ಕರಿಯೋತ ಯೂದ. ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿದವನೇ ಯೂದ. |
20
|
ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ. |
21
|
ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು. |
22
|
ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು. |
23
|
ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ. |
24
|
ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ. |
25
|
ಭೇದ ಹುಟ್ಟಿದ ಕುಟುಂಬ ಏಳಿಗೆ ಹೊಂದುವುದಿಲ್ಲ. |
26
|
ಸೈತಾನನು ತನ್ನ ವಿರುದ್ಧವಾಗಿಯೂ ತನ್ನ ಜನರ ವಿರುದ್ಧವಾಗಿಯೂ ತಾನೇ ಹೋರಾಟ ಮಾಡಿದರೆ ಅವನು ಅಂತ್ಯಗೊಳ್ಳುತ್ತಾನೆ. |
27
|
ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು. |
28
|
ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ. |
29
|
ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು. |
30
|
‘ಇವನಿಗೆ ದೆವ್ವಹಿಡಿದಿದೆ’ ಎಂದು ಧರ್ಮೋಪದೇಶಕರು ಆರೋಪಿಸಿದ್ದರಿಂದ ಯೇಸು ಹೀಗೆ ಹೇಳಬೇಕಾಯಿತು. |
31
|
ನಂತರ ಯೇಸುವಿನ ತಾಯಿ ಮತ್ತು ಆತನ ಸಹೋದರರು ಅಲ್ಲಿಗೆ ಬಂದರು. ಅವರು ಹೊರಗೆ ನಿಂತುಕೊಂಡು ಯೇಸುವಿಗೆ ಬರಬೇಕೆಂದು ಒಬ್ಬನ ಮೂಲಕ ಹೇಳಿ ಕಳುಹಿಸಿದರು. |
32
|
ಅನೇಕ ಜನರು ಯೇಸುವಿನ ಸುತ್ತಲೂ ಕುಳಿತಿದ್ದರು. ಅವನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾಯುತ್ತಿದ್ದಾರೆ” ಎಂದು ಹೇಳಿದನು. |
33
|
ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಕೇಳಿ |
34
|
ತನ್ನ ಸುತ್ತಲೂ ಕುಳಿತಿದ್ದ ಜನರ ಕಡೆಗೆ ನೋಡಿ, “ಈ ಜನರೇ ನನ್ನ ತಾಯಿ ಮತ್ತು ನನ್ನ ಸಹೋದರರು! |
35
|
ದೇವರ ಚಿತ್ತಕ್ಕನುಸಾರವಾಗಿ ನಡೆಯುವ ಜನರೇ ನನ್ನ ಸಹೋದರರು, ಸಹೋದರಿಯರು ಮತ್ತು ತಾಯಿ” ಎಂದು ಹೇಳಿದನು. |
Mark 3:28 Kannada Language Bible Words basic statistical display
COMING SOON ...