1
|
ಅಂದು ಸಬ್ಬತ್ ದಿನ. ಯೇಸು ಧಾನ್ಯದ ಹೊಲಗಳ ಮಾರ್ಗವಾಗಿ ನಡೆದುಹೋಗುತ್ತಿದ್ದನು. ಯೇಸುವಿನ ಶಿಷ್ಯರು ಆತನೊಂದಿಗಿದ್ದರು. ಅವರು ಹಸಿದಿದ್ದರು. ಆದ್ದರಿಂದ ಶಿಷ್ಯರು ತೆನೆಗಳನ್ನು ಕಿತ್ತುಕೊಂಡು ತಿನ್ನತೊಡಗಿದರು. |
2
|
ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು. |
3
|
ಅದಕ್ಕೆ ಯೇಸು, “ತಾನೂ ತನ್ನೊಂದಿಗಿದ್ದ ಜನರೂ ಹಸಿದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೇ? |
4
|
ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು. |
5
|
ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ? |
6
|
ಆದರೆ ದೇವಾಲಯಕ್ಕಿಂತಲೂ ಹೆಚ್ಚಿನವನು ಇಲ್ಲಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ. |
7
|
“ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು” ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ. |
8
|
“ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು. |
9
|
ಯೇಸು ಆ ಸ್ಥಳವನ್ನು ಬಿಟ್ಟು ಅವರ ಸಭಾಮಂದಿರದೊಳಕ್ಕೆ ಹೋದನು. |
10
|
ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು. |
11
|
ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ. |
12
|
ಮನುಷ್ಯನು ಕುರಿಗಿಂತ ಎಷ್ಟೋ ಬೆಲೆ ಉಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರ ಕೊಟ್ಟನು. |
13
|
ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು. |
14
|
ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು. |
15
|
ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು. |
16
|
ಆದರೆ ತಾನು ಯಾರೆಂಬುದನ್ನು ಬೇರೆ ಜನರಿಗೆ ಹೇಳಬಾರದೆಂದು ಆತನು ಜನರನ್ನು ಎಚ್ಚರಿಸಿದನು. |
17
|
ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ: |
18
|
“ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು. |
19
|
ಆತನು ಜಗಳವಾಡುವುದಿಲ್ಲ. ಕೂಗಾಡುವುದಿಲ್ಲ. ಬೀದಿಗಳಲ್ಲಿ ಆತನ ಶಬ್ದ ಕೇಳಬರುವುದಿಲ್ಲ. |
20
|
ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು. |
21
|
ಎಲ್ಲಾ ಜನರು ಆತನಲ್ಲಿ ಭರವಸೆ ಇಡುವರು.”ಯೆಶಾಯ 42:1-4 |
22
|
ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು. |
23
|
ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು. |
24
|
ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು. |
25
|
ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ. |
26
|
ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ? |
27
|
ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ. |
28
|
ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ. |
29
|
ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು. |
30
|
ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ. |
31
|
“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ. |
32
|
ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ. |
33
|
“ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು. |
34
|
ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ. |
35
|
ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ. |
36
|
ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು. |
37
|
ನಿಮ್ಮ ಮಾತುಗಳಿಂದಲೇ ನಿಮ್ಮನ್ನು ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು. |
38
|
ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು. |
39
|
ಯೇಸು, “ದುಷ್ಟರು ಮತ್ತು ಪಾಪಿಗಳು ಸೂಚಕಕಾರ್ಯವನ್ನು ಅಪೇಕ್ಷಿಸುತ್ತಾರೆ. ಆದರೆ ಅವರಿಗೆ ಒಂದು ಸೂಚಕಕಾರ್ಯವನ್ನೂ ಗುರುತಿಗಾಗಿ ತೋರಿಸಲಾಗುವುದಿಲ್ಲ. |
40
|
ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೊ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ. |
41
|
ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ. |
42
|
“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ. |
43
|
“ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ. |
44
|
‘ಆಗ ಅದು, ತಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಆ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ. |
45
|
ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು. |
46
|
ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು. |
47
|
ಒಬ್ಬನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾದಿದ್ದಾರೆ, ಅವರು ನಿನ್ನೊಂದಿಗೆ ಮಾತಾಡಬೇಕೆಂದಿದ್ದಾರೆ” ಎಂದನು. |
48
|
ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಉತ್ತರಕೊಟ್ಟು, |
49
|
ತನ್ನ ಶಿಷ್ಯರ ಕಡೆಗೆ ಕೈ ತೋರಿಸಿ, “ನೋಡಿ! ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು. |
50
|
ಪರಲೋಕದಲ್ಲಿರುವ ನನ್ನ ತಂದೆ ಇಚ್ಛಿಸುವಂಥವುಗಳನ್ನು ಮಾಡುವವನೇ ನನ್ನ ನಿಜವಾದ ಸಹೋದರ, ಸಹೋದರಿ ಮತ್ತು ತಾಯಿ” ಎಂದು ಹೇಳಿದನು. |
Matthew 12:1 Kannada Language Bible Words basic statistical display
COMING SOON ...