Bible Languages

Indian Language Bible Word Collections

Bible Versions

Books

Matthew Chapters

Matthew 12 Verses

Bible Versions

Books

Matthew Chapters

Matthew 12 Verses

1 ಅಂದು ಸಬ್ಬತ್ ದಿನ. ಯೇಸು ಧಾನ್ಯದ ಹೊಲಗಳ ಮಾರ್ಗವಾಗಿ ನಡೆದುಹೋಗುತ್ತಿದ್ದನು. ಯೇಸುವಿನ ಶಿಷ್ಯರು ಆತನೊಂದಿಗಿದ್ದರು. ಅವರು ಹಸಿದಿದ್ದರು. ಆದ್ದರಿಂದ ಶಿಷ್ಯರು ತೆನೆಗಳನ್ನು ಕಿತ್ತುಕೊಂಡು ತಿನ್ನತೊಡಗಿದರು.
2 ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.
3 ಅದಕ್ಕೆ ಯೇಸು, “ತಾನೂ ತನ್ನೊಂದಿಗಿದ್ದ ಜನರೂ ಹಸಿದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೇ?
4 ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.
5 ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ?
6 ಆದರೆ ದೇವಾಲಯಕ್ಕಿಂತಲೂ ಹೆಚ್ಚಿನವನು ಇಲ್ಲಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.
7 “ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು” ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ.
8 “ಮನುಷ್ಯಕುಮಾರನು ಸಬ್ಬತ್‌ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.
9 ಯೇಸು ಆ ಸ್ಥಳವನ್ನು ಬಿಟ್ಟು ಅವರ ಸಭಾಮಂದಿರದೊಳಕ್ಕೆ ಹೋದನು.
10 ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.
11 ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ.
12 ಮನುಷ್ಯನು ಕುರಿಗಿಂತ ಎಷ್ಟೋ ಬೆಲೆ ಉಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್‌ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರ ಕೊಟ್ಟನು.
13 ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು.
14 ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.
15 ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.
16 ಆದರೆ ತಾನು ಯಾರೆಂಬುದನ್ನು ಬೇರೆ ಜನರಿಗೆ ಹೇಳಬಾರದೆಂದು ಆತನು ಜನರನ್ನು ಎಚ್ಚರಿಸಿದನು.
17 ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ:
18 “ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.
19 ಆತನು ಜಗಳವಾಡುವುದಿಲ್ಲ. ಕೂಗಾಡುವುದಿಲ್ಲ. ಬೀದಿಗಳಲ್ಲಿ ಆತನ ಶಬ್ದ ಕೇಳಬರುವುದಿಲ್ಲ.
20 ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.
21 ಎಲ್ಲಾ ಜನರು ಆತನಲ್ಲಿ ಭರವಸೆ ಇಡುವರು.”ಯೆಶಾಯ 42:1-4
22 ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.
23 ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.
24 ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.
25 ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.
26 ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ?
27 ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.
28 ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.
29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.
30 ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.
31 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.
32 ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.
33 “ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.
34 ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.
35 ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.
36 ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.
37 ನಿಮ್ಮ ಮಾತುಗಳಿಂದಲೇ ನಿಮ್ಮನ್ನು ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.
38 ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.
39 ಯೇಸು, “ದುಷ್ಟರು ಮತ್ತು ಪಾಪಿಗಳು ಸೂಚಕಕಾರ್ಯವನ್ನು ಅಪೇಕ್ಷಿಸುತ್ತಾರೆ. ಆದರೆ ಅವರಿಗೆ ಒಂದು ಸೂಚಕಕಾರ್ಯವನ್ನೂ ಗುರುತಿಗಾಗಿ ತೋರಿಸಲಾಗುವುದಿಲ್ಲ.
40 ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೊ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.
41 ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ.
42 “ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.
43 “ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.
44 ‘ಆಗ ಅದು, ತಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಆ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ.
45 ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.
46 ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.
47 ಒಬ್ಬನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾದಿದ್ದಾರೆ, ಅವರು ನಿನ್ನೊಂದಿಗೆ ಮಾತಾಡಬೇಕೆಂದಿದ್ದಾರೆ” ಎಂದನು.
48 ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಉತ್ತರಕೊಟ್ಟು,
49 ತನ್ನ ಶಿಷ್ಯರ ಕಡೆಗೆ ಕೈ ತೋರಿಸಿ, “ನೋಡಿ! ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.
50 ಪರಲೋಕದಲ್ಲಿರುವ ನನ್ನ ತಂದೆ ಇಚ್ಛಿಸುವಂಥವುಗಳನ್ನು ಮಾಡುವವನೇ ನನ್ನ ನಿಜವಾದ ಸಹೋದರ, ಸಹೋದರಿ ಮತ್ತು ತಾಯಿ” ಎಂದು ಹೇಳಿದನು.

Matthew 12:1 Kannada Language Bible Words basic statistical display

COMING SOON ...

×

Alert

×