1
|
ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು. |
2
|
ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ. |
3
|
ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ. |
4
|
ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ. |
5
|
ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ. |
6
|
ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು. |
7
|
ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು. ಸೊಲೊಮೋನನು ತನ್ನ ಮಗನಿಗೆ ಮಾಡಿದ ಉಪದೇಶ |
8
|
ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ. |
9
|
ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ. |
10
|
ನನ್ನ ಮಗನೇ, ಪಾಪ ಮಾಡಬಯಸುವರು ನಿನಗೆ ದುಪ್ರೇರಣೆ ಮಾಡಿದರೆ ಅವರನ್ನು ಹಿಂಬಾಲಿಸಕೂಡದು. |
11
|
ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆ ಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ |
12
|
ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ. |
13
|
ಬೆಲೆಬಾಳುವ ಎಲ್ಲಾ ಬಗೆಯ ವಸ್ತುಗಳನ್ನು ಕದ್ದು ನಮ್ಮ ಮನೆಗಳಲ್ಲಿ ತುಂಬಿಸಿಕೊಳ್ಳೋಣ. |
14
|
ಅವುಗಳಲ್ಲಿ ನಿನಗೆ ಸಮಪಾಲು ದೊರೆಯುವುದು, ಬಂದು ನಮ್ಮೊಂದಿಗೆ ಸೇರಿಕೋ” ಎಂದು ಆ ಪಾಪಿಗಳು ಹೇಳಬಹುದು. |
15
|
ನನ್ನ ಮಗನೇ, ಅವರ ಜೀವಿತವನ್ನು ಅನುಸರಿಸಬೇಡ. ಅವರ ಜೀವಿತಮಾರ್ಗದಲ್ಲಿ ಮೊದಲನೆ ಹೆಜ್ಜೆಯನ್ನೂ ಇಡಬೇಡ. |
16
|
ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ. |
17
|
ಪಕ್ಷಿಗಳ ಕಣ್ಣೆದುರಿನಲ್ಲಿ ಬಲೆಹಾಕುವುದರಿಂದ ಪ್ರಯೋಜನವೇನೂ ಇಲ್ಲ. |
18
|
ಅವರಾದರೊ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ. |
19
|
ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು. |
20
|
ಜ್ಞಾನವು ಬೀದಿಗಳಲ್ಲಿ ಕೂಗುವ ಸ್ತ್ರೀಯಂತಿದೆ. ಆಕೆಯು ಬಹಿರಂಗ ಸ್ಥಳಗಳಲ್ಲಿ ಕೂಗಿ ಕರೆಯುತ್ತಾಳೆ. |
21
|
ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ: |
22
|
“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ? |
23
|
ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು. |
24
|
“ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ. |
25
|
ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ. |
26
|
ಆದ್ದರಿಂದ ನಿಮ್ಮ ಕಷ್ಟದಲ್ಲಿ ನಾನು ನಗುವೆನು; ಅಪಾಯವು ನಿಮಗೆ ಬಡಿಯುವಾಗ ನಿಮ್ಮನ್ನು ಗೇಲಿಮಾಡುವೆನು. |
27
|
ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ. |
28
|
“ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ. |
29
|
ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ. |
30
|
ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ. |
31
|
ಆದ್ದರಿಂದ ನೀವು ನಿಮ್ಮ ದುಷ್ಟನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ. |
32
|
“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು. |
33
|
ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.” |
Proverbs 1:5 Kannada Language Bible Words basic statistical display
COMING SOON ...