ಶೀಷನ ಮಕ್ಕಳಾದ ಎಲೀಹೋರೆಫ್ ಮತ್ತು ಅಹೀಯಾಹು; ಇವರಿಬ್ಬರೂ ನ್ಯಾಯಾಲಯದಲ್ಲಿ ನಡೆದ ಸಂಗತಿಗಳ ಕುರಿತಾಗಿ ಟಿಪ್ಪಣಿ ಬರೆಯುವ ಉದ್ಯೋಗವನ್ನು ಹೊಂದಿದ್ದರು. ಅಹೀಲೂದನ ಮಗನಾದ ಯೆಹೋಷಾಫಾಟನು ಜನರ ಇತಿಹಾಸದ ಕುರಿತು ಟಿಪ್ಪಣಿ ಬರೆದನು.
ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರ ಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರ ಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.
ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.
ರಾಮೋತ್ ಗಿಲ್ಯಾದಿಗೆ ಬೆನ್ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.
ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.
ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.
ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.
ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.
ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರ ಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು.
ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.
ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.
ಸೊಲೊಮೋನನು ಪ್ರಕೃತಿಯ ಬಗ್ಗೆಯೂ ಹೆಚ್ಚಾಗಿ ತಿಳಿದುಕೊಂಡನು. ಸೊಲೊಮೋನನು ಲೆಬನೋನಿನ ದೇವದಾರು ವೃಕ್ಷಗಳಿಂದ ಮೊದಲುಗೊಂಡು ಗೋಡೆಗಳಲ್ಲಿ ಬೆಳೆಯುವ ಗಿಡಗಳವರೆಗೆ, ವಿವಿಧ ರೀತಿಯ ಸಸ್ಯಗಳ ಬಗ್ಗೆ ಪ್ರಸ್ತಾಪಿಸಿದನು. ರಾಜನಾದ ಸೊಲೊಮೋನನು ಪ್ರಾಣಿಗಳ, ಪಕ್ಷಿಗಳ ಮತ್ತು ಹರಿದಾಡುವ ಜಂತುಗಳ ಬಗ್ಗೆಯೂ ಪ್ರಸ್ತಾಪಿಸಿದನು.
ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು.