ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.
ದಾವೀದನು ಅವನನ್ನು, “ಯುದ್ಧದಲ್ಲಿ ಯಾರು ಗೆದ್ದರು, ನನಗೆ ದಯವಿಟ್ಟು ತಿಳಿಸು?” ಎಂದು ಕೇಳಿದನು. ಅವನು, “ಇಸ್ರೇಲ್ ಜನರು ಯುದ್ಧರಂಗದಿಂದ ಓಡಿಹೋದರು. ಯುದ್ಧದಲ್ಲಿ ಅನೇಕರು ಸತ್ತುಹೋದರು. ಸೌಲನು ಮತ್ತು ಅವನ ಮಗನಾದ ಯೋನಾತಾನನೂ ಸತ್ತರು” ಎಂದು ಹೇಳಿದನು.
ಅದಕ್ಕೆ ಆ ಯುವಕನು, “ನಾನು ಆಕಸ್ಮಿಕವಾಗಿ ಗಿಲ್ಬೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು.
ಆದ್ದರಿಂದ ನಾನು ಅವನನ್ನು ಕೊಂದೆನು. ಅವನು ಮತ್ತೆ ಜೀವದಿಂದ ಉಳಿಯಲಾರದಷ್ಟು ಗಾಯಗೊಂಡಿದ್ದಾನೆಂಬುದು ನನಗೆ ತಿಳಿದಿತ್ತು. ನಂತರ ನಾನು ಅವನ ತಲೆಯಿಂದ ಕಿರೀಟವನ್ನೂ ಮತ್ತು ತೋಳಿನ ಕವಚವನ್ನೂ ತೆಗೆದುಕೊಂಡೆನು. ನನ್ನ ಒಡೆಯನೇ, ನಾನು ಆ ಕಿರೀಟವನ್ನು ಮತ್ತು ತೋಳಿನ ಕವಚವನ್ನು ನಿನ್ನ ಬಳಿಗೆ ತಂದಿದ್ದೇನೆ” ಎಂದು ಹೇಳಿದನು.
ಅವರು ಬಹಳ ದುಃಖದಿಂದ ಅತ್ತರು. ಅವರು ಸಂಜೆಯ ತನಕ ಏನನ್ನೂ ತಿನ್ನಲಿಲ್ಲ. ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಜನರೂ ಸತ್ತದ್ದಕ್ಕಾಗಿ ಮತ್ತು ಇಸ್ರೇಲಿಗಾಗಿ ದಾವೀದನು ಮತ್ತು ಅವನ ಜನರು ಅತ್ತರು. ಸೌಲನನ್ನೂ ಅವನ ಮಗನಾದ ಯೋನಾತಾನನನ್ನೂ ಮತ್ತು ಅನೇಕ ಮಂದಿ ಇಸ್ರೇಲರನ್ನೂ ಖಡ್ಗಗಳಿಂದ ಇರಿದು ಕೊಂದದ್ದಕ್ಕಾಗಿ ಅವರು ಅತ್ತರು.
ಸೌಲನ ಮರಣದ ಬಗ್ಗೆ ತಿಳಿಸಿದ ಯುವಕನಿಗೆ ದಾವೀದನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ಯುವಕನು, “ನಾನು ಇಸ್ರೇಲ್ ಜನರಲ್ಲಿ ವಾಸಿಸುತ್ತಿರುವ ವಿದೇಶೀಯನ ಮಗ. ನಾನೊಬ್ಬ ಅಮಾಲೇಕ್ಯನು” ಎಂದು ಉತ್ತರಿಸಿದನು.
ಯೋನಾತಾನನ ಬಿಲ್ಲು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಸೌಲನ ಖಡ್ಗವು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಈಗ ಸತ್ತುಬಿದ್ದಿರುವ ಸೈನಿಕರ ರಕ್ತವನ್ನು ಅವರ ಆಯುಧಗಳು ಚಿಮ್ಮಿಸಿದವು. ಅವರ ಆಯುಧಗಳು ಬಲಿಷ್ಠರ ಕೊಬ್ಬನ್ನು ಕತ್ತರಿಸಿ ಹಾಕಿದವು.
ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.