ಪರಿಶುದ್ಧರಾದ ಪ್ರವಾದಿಗಳು ಹಿಂದಿನಕಾಲದಲ್ಲಿ ಹೇಳಿದ್ದನ್ನು ನೀವು ಜ್ಞಾಪಿಸಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ. ನಮ್ಮ ರಕ್ಷಕನಾದ ಪ್ರಭುವು ನಿಮ್ಮ ಅಪೊಸ್ತಲರ ಮೂಲಕ ನೀಡಿದ ಆಜ್ಞೆಯನ್ನು ನೆನಪು ಮಾಡಿಕೊಳ್ಳಿರಿ.
ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.
ಆದರೆ ಬಹಕಾಲದ ಹಿಂದೆ ಏನು ನಡೆಯಿತೆಂಬುದನ್ನು ನೆನಪು ಮಾಡಿಕೊಳ್ಳಲು ಅವರಿಗೆ ಇಷ್ಟವಿಲ್ಲ. ಆದಿಯಲ್ಲಿ ದೇವರು ಆಕಾಶವನ್ನು ಸೃಷ್ಟಿಸಿದನು. ದೇವರು ಲೋಕವನ್ನು ನೀರೊಳಗಿಂದ ಮತ್ತು ನೀರಿನಿಂದ ಸೃಷ್ಟಿಸಿದನು. ದೇವರ ವಾಕ್ಯದಿಂದ ಇವೆಲ್ಲಾ ಸಂಭವಿಸಿದವು.
ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.
ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.
ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ಆ ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ.
ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರು ನೋಡುತ್ತಿದ್ದೇವೆ. ಆದುದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.
ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.
ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.