ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೊ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)
ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿ ಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.
ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ”ಎಂದು ಹೇಳಿದನು.
ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
”ನಾನು ನಿಮ್ಮೊಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.؆ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.
ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.
ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.
ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವು ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.
ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.
ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವಿಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.