ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.
ಆರು ದಿನಗಳ ನಂತರ, ಪೇತ್ರ ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.
ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನಾವು ಇಲ್ಲಿ ಮೂರು ಗುಡಾರಗಳನ್ನು ಹಾಕುತ್ತೇವೆ. ಒಂದು ನಿನಗೆ, ಒಂದು ಮೋಶೆಗೆ ಮತ್ತೊಂದು ಎಲೀಯನಿಗೆ” ಎಂದು ಹೇಳಿದನು.
ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?
ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.
ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.
ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.
ಅದಕ್ಕೆ ತಂದೆಯು, “ಬಾಲ್ಯದಿಂದಲೇ ಹೀಗಾಗುತ್ತಿದೆ. ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.
ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿ ಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.
ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದು ಬರುವನು” ಎಂದು ಹೇಳಿದನು.
ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.
ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.
“ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.
ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.
“ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.
ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು.
“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.